
ಬೆಟ್ಟದ ಭೈರವೇಶ್ವರ ದೇವಸ್ಥಾನ ಕಮಿಟಿಗೆ ನೂತನ ಪದಾಧಿಕಾರಿಗಳ ನೇಮಕ.
ಪ್ರವಾಸಿಗರಲ್ಲಿ ಸ್ವಚ್ಛತೆ ಹಾಗೂ ಧಾರ್ಮಿಕ ಸ್ಥಳದ ಸಂರಕ್ಷಣೆ ಕುರಿತು ಅರಿವು ಕಾರ್ಯಕ್ರಮ.
ಸಕಲೇಶಪುರ :- ತಾಲೂಕಿನ ಪ್ರಸಿದ್ಧ ಧಾರ್ಮಿಕ ಹಾಗೂ ಪ್ರವಾಸಿ ತಾಣವಾಗಿರುವ ಬೆಟ್ಟದ ಭೈರವೇಶ್ವರ ದೇವಸ್ಥಾನದ ಅಭಿವೃದ್ಧಿ, ನಿರ್ವಹಣೆ ಹಾಗೂ ಭಕ್ತರಿಗೆ ಉತ್ತಮ ಸೌಲಭ್ಯಗಳನ್ನು ಕಲ್ಪಿಸುವ ಉದ್ದೇಶದಿಂದ ಮಹತ್ವದ ಸಭೆ ನಡೆಯಿತು.ಎಂಟು ಗ್ರಾಮದ ಗ್ರಾಮಸ್ಥರು ಹಾಗೂ ಸಂಘ ಪರಿವಾರದ ಮುಖಂಡರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ದೇವಸ್ಥಾನ ಕಮಿಟಿಯ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಸಭೆಯಲ್ಲಿ ಬೈರಮುಡಿ ಬಿ.ಎನ್. ಸುಬ್ರಾಯ್ ಗೌಡ ಅವರನ್ನು ದೇವಸ್ಥಾನ ಕಮಿಟಿಯ ಅಧ್ಯಕ್ಷರಾಗಿ ಹಾಗೂ ಯೋಗೇಂದ್ರ ನೆಲಗಳ್ಳಿ ಅವರನ್ನು ಉಪಾಧ್ಯಕ್ಷರಾಗಿ ಸರ್ವಾನುಮತದಿಂದ ನೇಮಕ ಮಾಡಲಾಯಿತು.ಸಭೆಯಲ್ಲಿ ದೇವಸ್ಥಾನದ ಪಾವಿತ್ರ್ಯತೆಯನ್ನು ಕಾಪಾಡುವುದು, ಪ್ರವಾಸಿಗರಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದು, ದೇವಸ್ಥಾನದ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವುದು ಹಾಗೂ ಧಾರ್ಮಿಕ ಕ್ಷೇತ್ರದ ಶಿಸ್ತು ಮತ್ತು ಸ್ವಚ್ಛತೆಯನ್ನು ಕಾಪಾಡುವ ಕುರಿತು ಚರ್ಚಿಸಲಾಯಿತು.ಸಭೆಯ ನಂತರ ದೇವಸ್ಥಾನಕ್ಕೆ ಆಗಮಿಸುವ ಪ್ರವಾಸಿಗರಲ್ಲಿ ಸ್ವಚ್ಛತೆ, ಪರಿಸರ ಸಂರಕ್ಷಣೆ ಹಾಗೂ ಧಾರ್ಮಿಕ ಸ್ಥಳಗಳ ಗೌರವದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ವೇಳೆ ಪ್ರವಾಸಿಗರಿಗೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಮಿಕ ಘಟಕದ ತಾಲೂಕು ಅಧ್ಯಕ್ಷ ಹಾಗೂ ದೇವಸ್ಥಾನ ಕಮಿಟಿ ಸದಸ್ಯರಾದ ಸಂಗ್ರಾಮ್ ಗೌಡ ಹೂವುಗಳನ್ನು ನೀಡಿ ಆತ್ಮೀಯವಾಗಿ ಮನವಿ ಮಾಡುವ ಮೂಲಕ ದೇವಸ್ಥಾನದ ಸ್ವಚ್ಛತೆ ಹಾಗೂ ಪಾವಿತ್ರ್ಯತೆಯನ್ನು ಕಾಪಾಡುವಂತೆ ತಿಳಿಸಲಾಯಿತು.ನೂತನ ಕಮಿಟಿಯ ನೇತೃತ್ವದಲ್ಲಿ ಬೆಟ್ಟದ ಭೈರವೇಶ್ವರ ದೇವಸ್ಥಾನವು ಮತ್ತಷ್ಟು ಅಭಿವೃದ್ಧಿ ಹೊಂದಿ ಭಕ್ತರು ಹಾಗೂ ಪ್ರವಾಸಿಗರಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸಲಿದೆ ಎಂಬ ವಿಶ್ವಾಸವನ್ನು ಗ್ರಾಮಸ್ಥರು ವ್ಯಕ್ತಪಡಿಸಿದರು.ಕಾರ್ಯಕ್ರಮದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ಸುಧೀರ್ ಭಟ್, ಹೂಡಚಳ್ಳಿ ಲೋಕೇಶ್, ತಾಲೂಕು ಪಂಚಾಯಿತಿ ಮಾಜಿ ಸದಸ್ಯರಾದ ದೇವಲಕೆರೆ ಉಮೇಶ್ ವಾಜಿಗೆ, ಮಾಜಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರು, ರಕ್ಷಣಾ ವೇದಿಕೆಯ ಹೋಬಳಿ ಅಧ್ಯಕ್ಷರಾದ ಸುನಿಲ್ ಸೇರಿದಂತೆ ಎಂಟು ಗ್ರಾಮದ ಗ್ರಾಮಸ್ಥರು, ಸಂಘ ಪರಿವಾರದ ಪ್ರಮುಖರು ಹಾಗೂ ಭಕ್ತರು ಉಪಸ್ಥಿತರಿದ್ದರು.
