ಪ್ರಯಾಣಿಕರ ತಂಗುದಾಣ ಕಾಮಗಾರಿ ತಕ್ಷಣ ಪುನರಾರಂಭಿಸಲು ಹಿಂದೂ ಹಿತರಕ್ಷಣಾ ವೇದಿಕೆ ಆಗ್ರಹ

ಸಕಲೇಶಪುರ : ಪಟ್ಟಣದ ಹಳೆ ಬಸ್ ನಿಲ್ದಾಣದಲ್ಲಿ ನಿರ್ಮಾಣವಾಗುತ್ತಿರುವ ಪ್ರಯಾಣಿಕರ ತಂಗುದಾಣದ ಕಾಮಗಾರಿಯನ್ನು ತಕ್ಷಣ ಪುನರಾರಂಭಿಸಿ ಶೀಘ್ರ ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿ ಹಿಂದೂ ಹಿತರಕ್ಷಣಾ ವೇದಿಕೆಯಿಂದ ಹಳೇ ಬಸ್ ನಿಲ್ದಾಣದಲ್ಲಿ ಅಧಿಕಾರಿಗಳ ವಿರುದ್ಧ ಬಿತ್ತಿ ಪತ್ರ ಹಿಡಿದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಹಳೆ ಬಸ್ ನಿಲ್ದಾಣವು ಪಟ್ಟಣದ ಹೃದಯಭಾಗವಾಗಿದ್ದು, ಪ್ರತಿನಿತ್ಯ ಸಾವಿರಾರು ಪ್ರಯಾಣಿಕರು, ರೈತರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಈ ಪ್ರದೇಶವನ್ನು ಬಳಸುತ್ತಾರೆ. ಇಲ್ಲಿ ಸೂಕ್ತ ತಂಗುದಾಣದ ವ್ಯವಸ್ಥೆ ಇಲ್ಲದ ಕಾರಣ ಮಹಿಳೆಯರು, ಹಿರಿಯ ನಾಗರಿಕರು ಹಾಗೂ ಗ್ರಾಮೀಣ ಭಾಗಗಳಿಂದ ಬರುವ ಸಾರ್ವಜನಿಕರು ಬಿಸಿಲು ಮತ್ತು ಮಳೆಯಲ್ಲಿ ಬಸ್‌ಗಾಗಿ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ತಿಳಿಸಿದರು.ಸಾರ್ವಜನಿಕರ ಅನುಕೂಲಕ್ಕಾಗಿ ಆರಂಭಿಸಲಾಗಿದ್ದ ಪ್ರಯಾಣಿಕರ ತಂಗುದಾಣದ ಕಾಮಗಾರಿಯನ್ನು ಸ್ಥಗಿತಗೊಳಿಸಿರುವುದು ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿದೆ. ಯಾವುದೇ ರಾಜಕೀಯ ಅಥವಾ ಇತರ ಒತ್ತಡಗಳಿಗೆ ಮಣಿಯದೆ ಕಾಮಗಾರಿಯನ್ನು ತಕ್ಷಣ ಪುನರಾರಂಭಿಸಿ ಶೀಘ್ರ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಉಪ ವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಹಿಂದೂ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಮಂಜು ಕಬ್ಬಿನಗದ್ದೆ,ಮಿಲಿಟರಿ ಧರ್ಮಣ್ಣ, ನಾಗರಾಜ್ , ಆಟೋ ರವಿ, ಸವಿತಾ ಸಮಾಜ, ನಾರಾಯಣ ಆಳ್ವ, ಹೂವಿನ ವ್ಯಾಪಾರಿಗಳಾದ ಈಶ ಪದ್ಮಮ್ಮ, ದೀಪಕ್, ನವೀನ್, ಕೌಶಿಕ್, ಶಿವು ಜಿಪ್ಪಿ, ದೀಲಿಪ, ಹರೀಶ್ ಆಟೋ, ಮನು ಆಚಂಗಿ, ಪ್ರದೀಪ ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!