ಸಕಲೇಶಪುರ : ಬೆಂಗಳೂರಿನಲ್ಲಿ ಇಂದು ಆರೋಗ್ಯ ಸಚಿವರಾದ ಮಾನ್ಯ ಯು.ಟಿ. ಖಾದರ್ ಅವರನ್ನು ಸಕಲೇಶಪುರ ಯುವ ಕಾಂಗ್ರೆಸ್ ಘಟಕದ ವತಿಯಿಂದ ಭೇಟಿ ಮಾಡಿ, ಸಕಲೇಶಪುರ ಸರ್ಕಾರಿ ಆಸ್ಪತ್ರೆಯಲ್ಲಿ ಬಹು ದಿನಗಳಿಂದ ಇರುವ ಸ್ಕ್ಯಾನಿಂಗ್ ಸಮಸ್ಯೆಯನ್ನು ಬಗೆಹರಿಸುವಂತೆ ಮನವಿ ಸಲ್ಲಿಸಲಾಯಿತು.ಸಕಲೇಶಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ವ್ಯವಸ್ಥೆ ಸಮರ್ಪಕವಾಗಿ ಇಲ್ಲದ ಕಾರಣ, ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳು ಖಾಸಗಿ ಆಸ್ಪತ್ರೆಗಳಲ್ಲಿ ದುಬಾರಿ ದರ ನೀಡಿ ಸ್ಕ್ಯಾನಿಂಗ್ ಮಾಡಿಸಿಕೊಳ್ಳಬೇಕಾದ ಪರಿಸ್ಥಿತಿ ಎದುರಾಗಿದೆ. ಇದರಿಂದ ಸಾರ್ವಜನಿಕರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಆದ್ದರಿಂದ ಸಕಲೇಶಪುರ ಸರ್ಕಾರಿ ಆಸ್ಪತ್ರೆಗೆ ಅಗತ್ಯವಿರುವ ಸ್ಕ್ಯಾನಿಂಗ್ ಸೌಲಭ್ಯವನ್ನು ಒದಗಿಸಿ, ಸಾರ್ವಜನಿಕರ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸುವಂತೆ ಸಚಿವರಲ್ಲಿ ಮನವಿ ಸಲ್ಲಿಸಿದರು.
ನಂತರ ಸಚಿವರು ಮಾತನಾಡಿ ಆದಷ್ಟು ಬೇಗ ಸಮಸ್ಯೆಗೆ ಪರಿಹಾರ ಮಾಡಿಕೊಡಲಾಗುವುದು ಎಂದು ಭರವಸೆ ನೀಡಿದರು.ಈ ಸಂದರ್ಭದಲ್ಲಿ ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾದ ಧರ್ಮ H S, ಆಲೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಚಂದ್ರಶೇಖರ್, ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಸೈಯದ್ ಇದ್ರೀಸ್ ಹಾಗೂ ಧರ್ಮ ಕಾರ್ಯದರ್ಶಿ ಉಪಸ್ಥಿತರಿದ್ದರು.
